
ಅಖಿಖಿಲ ಭಾರತೀಯ ಗೂರ್ಖಾ ಲೀಗ್(ಎಬಿಜಿಎಲ್) ನಾಯಕ ಹಾಗೂ ರಾಜಕಾರಣಿ ಮದನ್ ತಮಂಗ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಿಬಿಐ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಬೆಂಗಳೂರು ನಗರದ ಹೊರವಲಯ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಪೂರನ್ ಬಹದ್ದೂರ್ ರೈ ಬಂಧಿತ ಆರೋಪಿ.
ಸಿಬಿಐ ಅಧಿಕಾರಿಗಳು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “2017ರಲ್ಲಿ ಡಾರ್ಜಿಲಿಂಗ್ನಿಂದ ತಲೆಮರೆಸಿಕೊಂಡಿದ್ದ ಆರೋಪಿಯು ಎಂಟು ವರ್ಷಗಳ ಬಳಿಕ ಸಿಬಿಐ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾರುತಿನಗರದಲ್ಲಿ ಆತನನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.
“ಮದನ್ ತಮಂಗ್ ಅವರನ್ನು 2010ರಲ್ಲಿ ಹಾಡಹಾಗಲೇ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ 20ಕ್ಕಿಂತ ಹೆಚ್ಚು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸ್ಥಳೀಯ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಹತ್ಯೆ ಪ್ರಕರಣದಲ್ಲಿ ಕಲ್ಕತ್ತಾ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಹಲವು ಸಮನ್ಸ್ ನೀಡಿದರೂ ಪೂರನ್ ಬಹದೂರ್ 2017ರಿಂದ ಗೈರಾಗಿದ್ದ. ಈ ಹಿನ್ನೆಲೆಯಲ್ಲಿ ಘೋಷಿತ ಅಪರಾಧಿಯೆಂದು ನ್ಯಾಯಾಲಯ ಘೋಷಿಸಿತ್ತು” ಎಂದು ಹೇಳಿದ್ದಾರೆ.
“ಆರೋಪಿಯನ್ನು ಬಂಧಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ತಾಂತ್ರಿಕ ಕಾರ್ಯಾಚರಣೆ ನಡೆಸಿದಾಗ ಆರೋಪಿಯು ಮಾರುತಿನಗರದಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಕಂಡುಕೊಂಡಿದ್ದರು. ಖಚಿತ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದ್ದು, ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು” ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.