ಹಾಸನ : ಹಾಸನ ವಿಶ್ವವಿದ್ಯಾಲಯವನ್ನು ಮುಚ್ಚಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಮರು ವಿಲೀನಗೊಳಿಸಬೇಕೆಂಬ ರಾಜ್ಯ ಸಚಿವ ಸಂಪುಟದ ಉಪಸಮಿತಿಯ ಶಿಫಾರಸ್ಸನ್ನು ಹಾಸನ ಜಿಲ್ಲೆಯ ಜನರಾದ ನಾವು ತೀವ್ರವಾಗಿ ವಿರೋಧಿಸುತ್ತಾ ಹಾಸನ ವಿಶ್ವವಿದ್ಯಾನಿಲಯವನ್ನು ಉಳಿಸಿ ಬೆಳೆಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ನಿರ್ಣಯಿಸಲಾಗಿದೆ. ಈ ಸಂಬಂಧ ಮಾರ್ಚ್ 16 ರಂದು ಹಾಸನದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಶ್ರೇಯಸ್ ಎಂ ಪಟೇಲ್ರವರು ಮತ್ತು ಅರಕಲಗೂಡು ಶಾಸಕರಾದ ಶ್ರೀ ಎ. ಮಂಜುವರು ಸೇರಿದಂತೆ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರು, ಪ್ರಮುಖ ವ್ಯಕ್ತಿಗಳು, ಜನಪರ ಸಂಘಟನೆಗಳ ಮುಖಂಡರು, ಸಾಹಿತಿಗಳು, ವಿಚಾರವಾದಿಗಳು, ಪತ್ರಕರ್ತರು ಮತ್ತು ಶಿಕ್ಷಣ ಪ್ರೇಮಿಗಳು ಭಾಗವಹಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಲಾಗಿದೆ.

1991 ರಿಂದ ಹಾಸನದಲ್ಲಿ ಮೈಸೂರು ವಿಶ್ವವಿದ್ಯಾಲಯದ ಭಾಗವಾಗಿ ಹೇಮ ಗಂಗೊತ್ರಿ ಸ್ನಾತಕೋತ್ತರ ಕೇಂದ್ರವು ಹಾಸನದಲ್ಲಿ ಅಸ್ತಿತ್ವದಲ್ಲಿದೆ. 2023 ಮಾರ್ಚ್ 21 ರಲ್ಲಿ ಕರ್ನಾಟಕ ಸರ್ಕಾರ ಹಾಸನದ ಹೇಮ ಗಂಗೊತ್ರಿಯನ್ನು ಸ್ವತಂತ್ರ ವಿಶ್ವವಿದ್ಯಾಲಯವಾಗಿ ಘೋಷಿಸಿದೆ. ಹಾಸನ ವಿಶ್ವವಿದ್ಯಾಲಯದಲ್ಲಿ ಹೇಮಗಂಗೋತ್ರಿ ಕ್ಯಾಂಪಸ್ನಲ್ಲಿ 11 ಸ್ನಾತಕೋತ್ತರ ವಿಭಾಗಗಳಿದ್ದು, ಒಟ್ಟು 466ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದಲ್ಲದೇ ಹಾಸನ ವಿಶ್ವವಿದ್ಯಾಲಯದ ಸದಸ್ಯತ್ವ ಪಡೆದ 58 ಪದವಿ ಕಾಲೇಜುಗಳಿವೆ. ಈ ಕಾಲೇಜುಗಳ ಪದವಿ ತರಗತಿಗಳಲ್ಲಿ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ವಿವಿಧ ಸ್ನಾತಕೋತ್ತರ ಕೇಂದ್ರಗಳಲ್ಲಿ 2000 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಈ ಒಟ್ಟು ವಿದ್ಯಾರ್ಥಿಗಳಲ್ಲಿ ಬಹುತೇಕ ಪ್ರಮಾಣದಲ್ಲಿ ವಿದ್ಯಾರ್ಥಿನಿಯರು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮತ್ತು ದಲಿತ ಹಾಗೂ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳೇ ಅಧಿಕ ಸಂಖ್ಯೆಯಲ್ಲಿದ್ದಾರೆ.
ಆದರೆ ರಾಜ್ಯದ ವಿಶ್ವವಿದ್ಯಾಲಯಗಳ ಸ್ಥಿತಿಗತಿಗಳನ್ನು ಕುರಿತು ಅಧ್ಯಯನ ಮಾಡಲು ರಚಿಸಿದ್ದ ರಾಜ್ಯದ ಸಚಿವ ಸಂಪುಟದ ಉಪಸಮಿತಿಯು ಹಾಸನ ವಿಶ್ವವಿದ್ಯಾಲಯವೂ ಸೇರಿದಂತೆ 9 ವಿಶ್ವವಿದ್ಯಾಲಯಗಳಿಗೆ ನೀಡಲಾಗಿದ್ದ ಸ್ವತಂತ್ರ ಸ್ಥಾನವನ್ನು ರದ್ದು ಮಾಡಿ. ಹಿಂದಿನ ವಿಶ್ವವಿದ್ಯಾಲಯಗಳಲ್ಲಿ ವಿಲೀನ ಮಾಡಲು ಶಿಫಾರಸ್ಸು ಮಾಡಿದೆ. ಇದರಿಂದಾಗಿ ಹಾಸನ ಜಿಲ್ಲೆಯ ವಿದ್ಯಾರ್ಥಿಗಳು ಮುಖ್ಯವಾಗಿ ಗ್ರಾಮೀಣ ಪ್ರದೇಶ ಮತ್ತು ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳು ಅದರಲ್ಲಿಯೂ ಪ್ರಮುಖವಾಗಿ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಪಡೆಯುವ ಅವಕಾಶಗಳಿಂದ ವಂಚಿತರಾಗಲಿದ್ದಾರೆ. ಹಾಗೂ ಹಾಲಿ ವ್ಯಾಸಂಗ ಮಾಡುತ್ತಿರುವ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಬಹಳ ತೊಂದರೆಯಾಗಲಿದೆ. ಈ ಮೊದಲು ಪ್ರತಿಯೊಂದು ಚಿಕ್ಕ ತಾಂತ್ರಿಕ ಸಮಸ್ಯೆ ಸರಿಪಡಿಸಲೂ ವಿದ್ಯಾರ್ಥಿಗಳು ಮೈಸೂರಿಗೆ ಪ್ರಯಾಣಿಸಿ ದಿನಗಟ್ಟಲೆ ಸಮಯ ವ್ಯಯಿಸಬೇಕಾಗಿತ್ತು. ಇದರಿಂದ ಹೆಚ್ಚಿನ ಹಣ, ಸಮಯ ವ್ಯರ್ಥವಾಗಿ ಶ್ರಮವಾಗುತ್ತಿತ್ತು. ಹಾಸನದಲ್ಲೇ ವಿವಿ ಆದ ನಂತರ ಆ ಸಮಸ್ಯೆಯನ್ನು ಸ್ಥಳೀಯವಾಗಿ ಬಗೆಹರಿಸಿಕೊಳ್ಳಲು ಸಾಧ್ಯವಾಗಿದೆ. ಹೀಗಾಗಿ ಹಾಸನ ವಿಶ್ವವಿದ್ಯಾನಿಲಯವನ್ನು ಮೈಸೂರಿಗೆ ವಿಲೀನಗೊಳಿಸಿದರೆ ಎಲ್ಲ ರೀತಿಯಲ್ಲೂ ವಿದ್ಯಾರ್ಥಿಗಳಿಗೆ ತೊಂದರೆ, ಸಮಸ್ಯೆ ಹೆಚ್ಚಾಗುತ್ತದೆ. ಓದಿನೆಡೆಗೆ ಗಮನಹರಿಸಲು ಕಷ್ಟವಾಗುತ್ತದೆ. ವಿಶ್ವವಿದ್ಯಾಲಯಗಳು ಆರ್ಥಿಕ ಉತ್ಪಾದನಾ ಕೇಂದ್ರಗಳಲ್ಲ. ಮಾನವ ಜ್ಞಾನಾಭಿವೃದ್ಧಿ ಕೇಂದ್ರಗಳು. ಹೀಗಾಗಿ ಈಗಿರುವ ಹೆಚ್ಚಿನ ಬೋಧನಾ, ಪರಿಕ್ಷಾ ಇನ್ನಿತರ ಶುಲ್ಕಗಳನ್ನು ಕಡಿಮೆ ಮಾಡಿ ಹೆಚ್ಚಿನ ಬಡ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದೆಡೆಗೆ ಆಕರ್ಷಿಸುವಂತಾಗಬೇಕು.
ಹಾಸನ ವಿಶ್ವವಿದ್ಯಾಲಯ ಕ್ಯಾಂಪಸ್ 78.08 ಎಕರೆ ಪ್ರದೇಶವನ್ನು ಮಾತ್ರ ಹೊಂದಿದೆ. ಅಗತ್ಯ ಪ್ರಮಾಣದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೊರತೆ, ಮೂಲಭೂತ ಸೌಕರ್ಯದ ಕೊರತೆ, ಅಗತ್ಯ ಅನುದಾನದ ಕೊರತೆಯ ನಡುವೆಯೂ ಹಾಸನ ವಿಶ್ವವಿದ್ಯಾಲಯ ಉತ್ತಮವಾಗಿ ಕೆಲಸ ಮಾಡುತ್ತಿದೆ. ಇದರಿಂದಾಗಿ ಜಿಲ್ಲೆಯ ವಿಧ್ಯಾರ್ಥಿಗಳಿಗೆ ಸ್ಥಳೀಯವಾಗಿ ಉನ್ನತ ಶಿಕ್ಷಣ ಪಡೆಯುವ ಮತ್ತು ಅಧ್ಯಯನ ಹಾಗೂ ಸಂಶೋಧನೆ ನಡೆಸುವ ಅವಕಾಶವೂ ಸಿಕ್ಕಿದೆ. ಇದರಿಂದಾಗಿ ಜಿಲ್ಲೆಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗೆ ತುಂಬಾ ಸಹಾಯವಾಗಲಿದೆ. ಭವಿಷ್ಯದಲ್ಲಿ ನಮ್ಮ ವಿಶ್ವವಿದ್ಯಾಲಯವು ಉತ್ತಮವಾಗಿ ಅಭಿವೃದ್ಧಿ ಹೊಂದಲು ಬಹಳ ಅವಕಾಶಗಳಿದ್ದು ಇದು ಹಾಸನ ಜಿಲ್ಲೆಯ ಹೆಮ್ಮೆಯೂ ಆಗಿದೆ.
ರಾಜ್ಯ ಸರ್ಕಾರ ತಾನೇ ಆರಂಭಿಸಿರುವ ಹಾಸನ ವಿಶ್ವವಿದ್ಯಾಲಯಕ್ಕೆ ಅಗತ್ಯ ಭೂಮಿ, ಸಿಬ್ಬಂದಿ, ಮೂಲಭೂತ ಸೌಕರ್ಯ ಮತ್ತು ಅನುದಾನ ನೀಡದೆ ಮುಚ್ಚಲು ಹೊರಟಿರುವುದು ಹಾಸನ ಜಿಲ್ಲೆಯೆ ವಿದ್ಯಾರ್ಥಿಗಳಿಗೆ ಮಾಡುತ್ತಿರುವ ಅತಿದೊಡ್ಡ ಅನ್ಯಾಯವಾಗಿದೆ. ಈ ಹಿಂದೆ ರಾಜ್ಯ ಸರ್ಕಾರ ಯಾವುದೇ ಅಗತ್ಯ ಮೂಲಭೂತ ಸೌಕರ್ಯಗಳು, ಅನುದಾನ ಮತ್ತು ಸಿಬ್ಬಂದಿ ಒದಗಿಸದೆ ಪೂರ್ವ ಷರತ್ತುಗಳನ್ನು ವಿಧಿಸಿ ತರಾತುರಿಯಲ್ಲಿ ಹಾಸನ ವಿಶ್ವವಿದ್ಯಾಲಯ ಸ್ಥಾಪಿಸಿತು. ಈಗ ಮರಳಿ ರಾಜ್ಯ ಸರ್ಕಾರ ಹಿಂದಿನ ಕೊರತೆಗಳನ್ನು ಸರಿಪಡಿಸಿ ವಿಶ್ವವಿದ್ಯಾಲಯವನ್ನು ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವ ಬದಲಿಗೆ ಅದನ್ನು ಮುಚ್ಚಲು ಹೊರಟಿದೆ. ಇದು ಸರ್ಕಾರಕ್ಕೆ ಉನ್ನತ ಶಿಕ್ಷಣ ಆದ್ಯತೆಯ ವಿಷಯವಾಗಿಲ್ಲ ಎನ್ನುವುದನ್ನು ತೋರಿಸುತ್ತದೆ.
ಈ ಹಿನ್ನೆಲೆಯಲ್ಲಿ ಹಾಸನ ವಿಶ್ವವಿದ್ಯಾಲಯವನ್ನು ಉಳಿಸಿ ಅದಕ್ಕೆ ಅಗತ್ಯವಿರುವ ಭೂಮಿ, ಅನುದಾನ, ಖಾಯಂ ಸಿಬ್ಬಂದಿ ಮತ್ತು ಮೂಲಭೂತ ಸೌಕರ್ಯ ಕಲ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಹಾಸನ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು ಹಂತಹಂತವಾಗಿ ನಿರಂತರ ಹೋರಾಟದ ಯೋಜನೆಯನ್ನು ರೂಪಿಸಿದೆ. ಇದರ ಭಾಗವಾಗಿ ಮಾರ್ಚ್ 16 ರ ಭಾನುವಾರ ಹಾಸನದಲ್ಲಿ ನಡೆದ ದುಂಡು ಮೇಜಿನ ಸಭೆಯಲ್ಲಿ ಈ ಕೆಳಕಂಡಂತೆ ಸರ್ವಾನುಮತದ ನಿರ್ಣಯಗಳನ್ನು ಕೈಗೊಳ್ಳಲಾಯಿತು.
1. ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟದ ಉಪಸಮಿತಿಯ ವರದಿಯಲ್ಲಿರುವಂತೆ ಹಾಸನ ವಿಶ್ವವಿದ್ಯಾಲಯವನ್ನು ಮುಚ್ಚುವ ಅಥವಾ ಮೈಸೂರು ವಿಶ್ವವಿದ್ಯಾಲಯಕ್ಕೆ ವಿಲೀನಗೊಳಿಸುವ ಪ್ರಸ್ತಾಪವನ್ನು ಕೈಬಿಡಬಿಡಬೇಕು ಹಾಗೂ ಹಾಸನ ವಿಶ್ವವಿದ್ಯಾಲಯವನ್ನು ಉಳಿಸಿ ಸ್ವತಂತ್ರವಾಗಿ ಬೆಳೆಸಬೇಕು. ಹಾಗೂ ಇನ್ನುಳಿದ ಯಾವ ವಿಶ್ವವಿದ್ಯಾಲಯಗಳನ್ನೂ ಮುಚ್ಚುವ ಅಥವಾ ವಿಲೀನಗೊಳಿಸುವ ಪ್ರಸ್ತಾಪವನ್ನು ಕೈಬಿಡಬೇಕು.
2. ಹಾಸನ ವಿಶ್ವವಿದ್ಯಾಲಯ ಸ್ಥಾಪನೆಯಾದಾಗ ವಿಧಿಸಿರುವ ಪೂರ್ವ ಷರತ್ತುಗಳನ್ನು ಕೈಬಿಟ್ಟು ಹಾಸನ ವಿಶ್ವವಿದ್ಯಾಲಯಕ್ಕೆ ಅಗತ್ಯವಿರುವ ಆರ್ಥಿಕ ಅನುದಾನ ಮತ್ತು ಭೂಮಿ ನೀಡಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಗತ್ಯವಿರುವಷ್ಟು ಖಾಯಂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಗೆ ಕ್ರಮ ವಹಿಸಬೇಕು.
3. ಹಾಸನ ವಿಶ್ವವಿದ್ಯಾಲಯದ ಸೆನೆಟ್, ಸಿಂಡಿಕೇಟ್, ಅಕಾಡೆಮಿಕ್ ಕೌನ್ಸಿಲ್ ಮತ್ತು ವಿಶ್ವವಿದ್ಯಾಲಯ ಅಭಿವೃದ್ಧಿ ಸಮಿತಿ ರಚಿಸಿ ಹಾಸನ ಜಿಲ್ಲೆಗೆ ಸಂಬಂಧಿಸಿದ ಹಾಗೂ ಶಿಕ್ಷಣ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಗಳನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕು.
4. ಹಾಸನ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿಭಾಗವನ್ನು ಆರಂಭಿಸಬೇಕು. ಹಾಗೂ ಹಾಸನ ವಿಶ್ವವಿದ್ಯಾಲಯವನ್ನು ಹಾಸನ ಜಿಲ್ಲೆಯ ಶೈಕ್ಷಣಿಕ, ಸಾಹಿತ್ಯಿಕ, ಸಾಮಾಜಿಕ, ಪರಿಸರ ಮತ್ತು ಸಾಂಸ್ಕೃತಿಕ ವಿಶಯಗಳ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನಾಗಿ ಅಬಿವೃದ್ಧಿಪಡಿಸಬೇಕು.
5. ಹಾಸನ ವಿಶ್ವವಿದ್ಯಾಲಯವನ್ನು ಉಳಿಸುವ ಸಂಬಂಧ ಮಾನ್ಯ ಮುಖ್ಯಮಂತ್ರಿಯವರು ಹಾಸನ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಹಾಸನ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿಯ ಪ್ರಮುಖರೊಂದಿಗೆ ಸಭೆ ನಡೆಸಲು ದಿನಾಂಕ ನಿಗದಿಪಡಿಸಬೇಕು.
ಹಾಸನ ವಿಶ್ವವಿದ್ಯಾಲಯವನ್ನು ಉತ್ತಮವಾಗಿ ಅಭಿವೃದ್ಧಿ ಪಡಿಸಲು ಹಾಸನ ಜಿಲ್ಲೆಯ ಜನತೆ ಎಲ್ಲಾ ರೀತಿಯ ಸಹಕಾರ ಮತ್ತು ಬೆಂಬಲ ನೀಡಲಿದೆ. ಕರ್ನಾಟಕ ಸರ್ಕಾರ ಹಾಸನ ಜಿಲ್ಲೆಯ ಅಸ್ಮಿತೆಯಾಗಿರುವ ಹಾಸನ ವಿಶ್ವವಿದ್ಯಾಲಯವನ್ನು ಉಳಿಸಿ ಅಭಿವೃದ್ಧಿ ಪಡಿಸಲು ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹಾಸನ ವಿಶ್ವವಿದ್ಯಾಲಯ ಉಳಿಸಿ ಹೊರಾಟವನ್ನು ತೀವ್ರ ಸ್ವರೂಪದಲ್ಲಿ ನಡೆಸಲು ಸಭೆಯು ಒಕ್ಕೊರಲಿನಿಂದ ತೀರ್ಮಾನ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಾಸನ ಜಿಲ್ಲೆಯ ಜನರ ಆಶೋತ್ತರಗಳನ್ನು ಗೌರವಿಸಿ ಹಾಸನ ವಿಶ್ವವಿದ್ಯಾಲಯವನ್ನು ಉಳಿಸಿ ಸ್ವತಂತ್ರವಾಗಿ ಅಭಿವೃದ್ಧಿ ಪಡಿಸಬೇಕೆಂದು ಈ ಮೂಲಕ ಆಗ್ರಹಿಸಿರುತ್ತಾರೆ.
ವಂದನೆಗಳೊಂದಿಗೆ, ಇತಿ ತಮ್ಮ ವಿಶ್ವಾಸಿಗಳು
– ಆರ್.ಪಿ. ವೆಂಕಟೇಶ್ಮೂರ್ತಿ
– ಡಾ. ಎಚ್.ಎಲ್. ಮಲ್ಲೇಶ್ಗೌಡ
– ಧರ್ಮೇಶ್
– ರೂಪ ಹಾಸನ
– ಎಚ್.ಕೆ. ಸಂದೇಶ್
– ಎಂ.ಜಿ. ಪೃಥ್ವಿ
– ಅಂಬುಗ ಮಲ್ಲೇಶ್
– ಅಗಿಲೆ ಯೋಗೇಶ್
– ಚಿನ್ನೇನಹಳ್ಳಿ ಸ್ವಾಮಿ
– ಬಿ ಈ ಶಿವರಾಮೇಗೌಡ
– ಅರವಿಂದ
– ಕುಮಾರ್ ಗೌರವ್
– ಸಿ.ಬಿ ವೆಂಕಟೇಗೌಡ
– ಸಮೀರ್ ಅಹಮದ್
-ಕಲಾವತಿ