
ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿನ ಮೋಟಾರು ವಾಹನ ನಿರೀಕ್ಷಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ವಿಜಯಕುಮಾರ್ ಭಜಂತ್ರಿ(53) ಹೃದಯಾಘಾತದಿಂದ ಸಾವನ್ನಪ್ಪಿದ ವಾಹನ ನಿರೀಕ್ಷಕ ಅಧಿಕಾರಿ.
ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಕ್ರಾಸ್ ಗ್ರಾಮದವರಾದ ಇವರು ನಾಲ್ಕು ತಿಂಗಳ ಹಿಂದೆ ಬಸವಕಲ್ಯಾಣಕ್ಕೆ ವರ್ಗಾವಣೆಯಾಗಿ ಬಂದಿದ್ದರು. ನಗರದ ಕ್ರೀಡಾಂಗಣ ಬಳಿಯ ಬಡಾವಣೆಯಲ್ಲಿ ಬಾಡಿಗೆ ಮನೆ ಪಡೆದು ವಾಸವಿದ್ದರು.
ಕೊಠಡಿಯಲ್ಲಿ ಮಲಗಿದ್ದ ವೇಳೆ ಹೃದಯಾಘಾತವಾಗಿದೆ. ಮನೆಯಲ್ಲಿ ಒಬ್ಬರೇ ಇರುವ ಕಾರಣ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.
ವಿಷಯ ತಿಳಿದು ನಗರ ಠಾಣೆಯ ಸಿಪಿಐ ಅಲಿಸಾಬ್ ಹಾಗೂ ಸಿಬ್ಬಂದಿ ಸಮಕ್ಷಮದಲ್ಲಿ ಬಾಗಿಲು ತೆರೆದು ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿ ಶವಪರೀಕ್ಷೆ ನಡೆಸಲಾಗಿದೆ.