
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ನಿವೇಶನಗಳ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿ ಎಂ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಇ.ಡಿ(ಜಾರಿ ನಿರ್ದೇಶನಾಲಯ) ಜಾರಿ ಮಾಡಿರುವ ಸಮನ್ಸ್ಗೆ ವಿಧಿಸಲಾಗಿದ್ದ ಮಧ್ಯಂತರ ತಡೆ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ.
ಈ ಸಂಬಂಧ ಪಾರ್ವತಿ ಹಾಗೂ ಬೈರತಿ ಸುರೇಶ್ ಪ್ರತ್ಯೇಕವಾಗಿ ಸಲ್ಲಿಸಿರುವ ರಿಟ್ ಅರ್ಜಿಗಳನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ(ಧಾರವಾಡ) ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಸೋಮವಾರ ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಬೈರತಿ ಸುರೇಶ್ ಪರ ಹಿರಿಯ ವಕೀಲ ಸಿ ವಿ ನಾಗೇಶ್ ಮತ್ತು ಪಾರ್ವತಿ ಅವರ ಪರ ಹಿರಿಯ ವಕೀಲ ಸಂದೇಶ್ ಜೆ ಚೌಟ ಸುದೀರ್ಘ ವಾದ ಮಂಡಿಸಿದ್ದು, ‘ಮುಡಾ ಮಾಜಿ ಆಯುಕ್ತ ಡಿ ಬಿ ನಟೇಶ್ ಅವರಿಗೆ ಇ.ಡಿ ಜಾರಿ ಮಾಡಿದ್ದ ಸಮನ್ಸ್ ಅನ್ನು ಇದೇ ಹೈಕೋರ್ಟ್ನ ಸಮನ್ವಯ ಪೀಠ ವಜಾಗೊಳಿಸಿದೆ. ಅದೇ ತೀರ್ಪನ್ನು ಈ ಅರ್ಜಿದಾರರ ಪ್ರಕರಣದಲ್ಲೂ ಪರಿಗಣಿಸಬೇಕೆಂದು ಕೋರಿದರು.
ಇ.ಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ ಅರವಿಂದ ಕಾಮತ್ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಇದೇ 20ಕ್ಕೆ ಮುಂದೂಡಿದೆ.