ವಿಜಯಪುರದ ಗಾಂಧಿನಗರ ಪ್ರದೇಶದಲ್ಲಿರು ಇಟ್ಟಿಗೆ ಭಟ್ಟಿಯೊಂದರಲ್ಲಿ ಕೆಲಸ ಮಾಡಲು ನಿರಾಕರಿಸಿದ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ರೋಪಿಗಳನ್ನು ಬಂಧಿಸಲಾಗಿದ್ದು, ಮೂವರು ತಪ್ಪಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, “ಪ್ರಕರಣಕ್ಕೆ ಸಂಬಂಧಿಸಿದಂತೆ ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ ಎಂಬಾತನನ್ನು ಬಂಧಿಸಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಬಿಎನ್ಎಸ್ 109 ಅಡಿಯಲ್ಲಿ ಹತ್ಯೆ ಯತ್ನ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.
“ಇಟ್ಟಿಗೆ ಭಟ್ಟಿ ಮಾಲೀಕ ಮತ್ತು ಆತನ ಮಗ ಸೇರಿಕೊಂಡು ಕಾರ್ಮಿಕರನ್ನು ಕೊಠಡಿಯಲ್ಲಿ ಕೂಡಿಹಾಕಿ, ಕೈ–ಕಾಲು ಕಟ್ಟಿ, ಕಾಲ ಮೇಲೆ ನಿಂತು ಪೈಪ್ನಿಂದ ಹಲ್ಲೆ ಮಾಡಿರುವ ಅಮಾನವೀಯ ಪ್ರಕರಣದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅಂಗಾಲು, ಬೆನ್ನು, ಸೊಂಟಕ್ಕೆ ತೀವ್ರ ಹಲ್ಲೆಗೊಳಗಾಗಿರುವ ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ ಮಾದರ ಎಂಬ ಕಾರ್ಮಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ” ಎಂದು ತಿಳಿಸಿದರು.
“ಇಟ್ಟಿಗೆ ಭಟ್ಟಿಯಲ್ಲಿ ಪ್ರತಿದಿನ ₹600 ಕೂಲಿ ಪಡೆಯುತ್ತಿದ್ದ ಕಾರ್ಮಿಕರು ಕಳೆದ ಸಂಕ್ರಮಣದಂದು ಮನೆಗೆ ತೆರಳಿದ್ದರು. ಜನವರಿ 16ರಂದು ಮರಳಿ ಇಟ್ಟಿಗೆ ಭಟ್ಟಿಗೆ ಬಂದಿದ್ದ ಕಾರ್ಮಿಕರು ಕೆಲಸ ಮಾಡುವುದಿಲ್ಲವೆಂದು ತಮ್ಮೆಲ್ಲ ಸಾಮಾನುಗಳನ್ನು ಮನೆಗೆ ಕೊಂಡೊಯ್ಯಲು ಮುಂದಾಗಿದ್ದರು. ಇದನ್ನು ಕಂಡ ಖೇಮು ರಾಠೋಡ ತಮ್ಮ ಜನರನ್ನು ಕರೆಯಿಸಿ, ಕಾರ್ಮಿಕರನ್ನು ಮೂರು ದಿನ ಕೊಠಡಿಯಲ್ಲಿ ಕೂಡಿ ಹಾಕಿ ನಿತ್ಯವೂ ಹಲ್ಲೆ ಮಾಡಿಸಿದ್ದಾನೆ. ಅಲ್ಲದೆ, ಕಾರ್ಮಿಕರನ್ನು ಹೆದರಿಸಿ, ಬೆದರಿಸಿ ಕೆಲಸ ಮಾಡಿಸಿಕೊಂಡಿದ್ದಾನೆ” ಎಂದು ನಿಂಬರಗಿ ತಿಳಿಸಿದ್ದಾರೆ.
ಘಟನೆ ಹಿನ್ನೆಲೆ
ವಿಜಯಪುರದ ಹೊರವಲಯದ ಗಾಂಧಿನಗರದ ಸ್ಟಾರ್ ಚೌಕ್ ಬಳಿ ಇರುವ ಇಟ್ಟಿಗೆ ಭಟ್ಟಿಯಲ್ಲಿ ಕೆಲಸಕ್ಕೆ ಬರುವುದಾಗಿ ಮುಂಗಡವಾಗಿ ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಖೇಮು ರಾಠೋಡ್ ಪೈಪ್ಗಳಿಂದ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆಂಬ ಆರೋಪ ಕೇಳಿಬಂದಿತ್ತು.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದವರಾದ ಮೂವರು ಕಾರ್ಮಿಕರು, ಹಬ್ಬಕ್ಕೆಂದು ಊರಿಗೆ ಹೋಗಿದ್ದರು. ಊರಿಗೆ ಹೋಗಿ ವಾಪಸ್ ಬರಲು ವಿಳಂಬ ಮಾಡಿದ್ದಕ್ಕೆ ಹಲ್ಲೆ ಮಾಡಲಾಗಿದೆ. ಕಾರ್ಮಿಕರು ಎಷ್ಟೇ ಬೇಡಿಕೊಂಡರೂ ಬಿಡದೆ ಹಲ್ಲೆ ಮಾಡಿ, ದೌರ್ಜನ್ಯ ಎಸಗಿರುವ ಇಟ್ಟಂಗಿಭಟ್ಟಿ ಮಾಲೀಕನ ಅಮಾನವೀಯ ಕೃತ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.
“ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ನಡೆದಿರುವ ಹಲ್ಲೆ ಅಮಾನವೀಯವಾಗಿದೆ. ತಪ್ಪಿತಸ್ಥರನ್ನು ಬಂಧಿಸಿದ್ದು, ಕಠಿಣ ಕಾನೂನು ಕ್ರಮವನ್ನೂ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು ಮಾಧ್ಯಮಗಳಿಗೆ ತಿಳಿಸಿದ್ದರು.
“ಇಟ್ಟಿಗೆ ಭಟ್ಟಿಯಲ್ಲಿ ನಡೆದಿರುವ ಘಟನೆ ಬಗ್ಗೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠರ ಜತೆ ಮಾತನಾಡಿ, ಸೂಕ್ತ ಕ್ರಮ ಜರುಗಿಸಲು ಸೂಚಿಸಿದ್ದೇನೆ. ಅಲ್ಲಿನ ಜಿಲ್ಲಾಧಿಕಾರಿಗಳು ಕರ್ತವ್ಯದ ಮೇಲೆ ಬೆಂಗಳೂರಿನಲ್ಲೇ ಇದ್ದಾರೆ. ಅವರೊಂದಿಗೂ ಈ ಬಗ್ಗೆ ಮಾತನಾಡಿರುವೆ. ತಪ್ಪಿತಸ್ಥರನ್ನು ಹಾಗೆಯೇ ಬಿಡುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದರು.
ಇದೀಗ ಇಬ್ಬರು ಆರೋಪಿಗಳ ಬಂಧನವಾಗಿದ್ದು, ಮೂವರು ಆರೋಪಿಗಳು ತಲಮರೆಸಿಕೊಂಡಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.